ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಪುರಾಣ ಪ್ರಸಿದ್ಧ ಗೋಕರ್ಣದಲ್ಲಿ ಗುರುವಾರ ಮಹಾಶಿವರಾತ್ರಿಯ ಅಂಗವಾಗಿ ಮಹಾಬಲೇಶ್ವರನ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.
ರಥಬೀದಿಯಲ್ಲಿ ನಡೆದ ರಥೋತ್ಸವ ಮುಖ್ಯ ದೇವರಾದ ಮಹಾಬಲೇಶ್ವರನ ಮೂರ್ತಿ ಹೊತ್ತು ವೆಂಕಟ್ರಮಣ ದೇವಸ್ಥಾನದವರೆಗೆ ಸಾಗಿ ತಿರುಗಿ ಮೂಲಸ್ಥಾನಕ್ಕೆ ಬಂದು ನಿಂತಿತು. ಅತೀ ಎತ್ತರದ ರಥ ಎಂದೇ ಪ್ರಸಿದ್ಧಿ ಪಡೆದ, ಪುರಾತನ ರಥವನ್ನು ಬಣ್ಣ-ಬಣ್ಣದ ಬಾವುಟಗಳಿಂದ, ತಳಿರು-ತೋರಣಗಳಿಂದ ಹಾಗೂ ಹೂವಿನಿಂದ ಅಲಂಕರಿಸಲಾಗಿತ್ತು.
ಸ್ಥಳೀಯರ ಜೊತೆ ಅನೇಕ ವಿದೇಶಿಯರೂ ರಥೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಹಸ್ರಾರು ಜನರು ಈ ರಥೋತ್ಸವಕ್ಕೆ ಸಾಕ್ಷಿಯಾದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದ್ರಿನಾಥ, ಭಟ್ಕಳ ಡಿ.ಎಸ್.ಪಿ. ಬೆಳ್ಳಿಯಪ್ಪ, ಗೋಕರ್ಣ ಠಾಣೆಯ ಇನ್ಸ್ಪೆಕ್ಟರ್ ವಸಂತ ಆಚಾರಿ, ಸಬ್ ಇನ್ಸ್ಪೆಕ್ಟರ್ ಸುಧಾ ಅಘನಾಶಿನಿ, ರವೀಂದ್ರ ಬಿರಾದಾರ್ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ದೇವಸ್ಥಾನದ ಮೇಲುಸ್ತುವಾರಿ ಸಮಿತಿಯ ಕಾರ್ಯದರ್ಶಿಯಾಗಿರುವ ಕುಮಟಾ ಉಪವಿಭಾಗಾಧಿಕಾರಿ ರಾಹುಲ್ ಪಾಂಡೆ, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕವಳೆ ಮಠದ ಕೈವಲ್ಯ ಮಠಾಧೀಶ ಶಿವಾನಂದ ಸರಸ್ವತಿ ಸ್ವಾಮೀಜಿ ರಥಕಾಣಿಕೆ ನೆರವೇರಿಸಿದರು.